1 ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
2 ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.
3 ನಾನು ನನ್ನ ಇಬ್ಬರು ಸಾಕ್ಷಿಗಳಿಗೆ ಅಧಿಕಾರವನ್ನು ಕೊಡುತ್ತೇನೆ. ಅವರು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದನೆ ಮಾಡುತ್ತಾರೆ. ಅವರು ಗೋಣಿತಟ್ಟುಗಳನ್ನು ಧರಿಸಿಕೊಂಡಿರುತ್ತಾರೆ.”
4 ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.
5 ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.
6 ಈ ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
7 ಈ ಇಬ್ಬರು ಸಾಕ್ಷಿಗಳು ತಮ್ಮ ಸಂದೇಶವನ್ನು ಹೇಳಿ ಮುಗಿಸಿದ ನಂತರ, ತಳವಿಲ್ಲದ ಕೂಪದಿಂದ ಮೇಲಕ್ಕೆ ಬರುವ ಮೃಗವು ಅವರ ವಿರುದ್ಧ ಹೋರಾಟ ಮಾಡುತ್ತದೆ. ಈ ಮೃಗವು ಅವರನ್ನು ಸೋಲಿಸಿ, ಕೊಂದು ಹಾಕುತ್ತದೆ.
8 ಈ ಸಾಕ್ಷಿಗಳ ಎರಡು ಶವಗಳು ಮಹಾನಗರದ ಬೀದಿಯಲ್ಲಿ ಬಿದ್ದಿರುತ್ತವೆ. ಈ ನಗರಕ್ಕೆ ಸೊದೋಮ್ ಮತ್ತು ಈಜಿಪ್ಟ್ ಎಂದು ಹೆಸರಾಗುತ್ತದೆ. ಆ ನಗರದ ಹೆಸರುಗಳಿಗೆ ವಿಶೇಷ ಅರ್ಥವಿದೆ. ಪ್ರಭುವು ಈ ನಗರದಲ್ಲಿಯೇ ಶಿಲುಬೆಗೇರಿಸಲ್ಪಟ್ಟನು.
9 ಸಕಲ ಪ್ರಜೆ, ಕುಲ, ಭಾಷೆ, ಜನಾಂಗದವರು ಮೂರುವರೆ ದಿನಗಳ ಕಾಲ ಈ ಸಾಕ್ಷಿಗಳ ಶವಗಳನ್ನು ನೋಡುತ್ತಾ ಇರುತ್ತಾರೆ. ಅವರನ್ನು ಸಮಾಧಿ ಮಾಡಲು ಜನರು ಒಪ್ಪುವುದಿಲ್ಲ.
10 ಈ ಇಬ್ಬರು ಸತ್ತದ್ದಕ್ಕಾಗಿ ಭೂಮಿಯ ಮೇಲಿನ ಜನರು ಸಂತೋಷಗೊಳ್ಳುವರು. ಅವರು ಸಮಾರಂಭಗಳನ್ನು ನಡೆಸಿ, ಒಬ್ಬರಿಗೊಬ್ಬರು ಉಡುಗೊರೆಗಳನ್ನು ನೀಡುತ್ತಾರೆ. ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸಿಸುತ್ತಿರುವ ಜನರಿಗೆ ಹೆಚ್ಚು ಸಂಕಟವನ್ನು ಉಂಟುಮಾಡಿದ್ದರಿಂದ ಆ ಜನರು ಹೀಗೆ ಮಾಡುತ್ತಾರೆ.
11 ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.
12 ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.
13 ಆ ಸಮಯದಲ್ಲಿ ಮಹಾಭೂಕಂಪವಾಯಿತು. ಆ ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಭೂಕಂಪದಲ್ಲಿ ಏಳು ಸಾವಿರ ಜನರು ನಾಶವಾದರು. ಸಾಯದೆ ಉಳಿದಿದ್ದ ಜನರು ಬಹು ಭಯಗೊಂಡು ಪರಲೋಕದ ದೇವರನ್ನು ಘನಪಡಿಸಿದರು.
14 ಎರಡನೆಯ ಮಹಾವಿಪತ್ತು ಮುಗಿಯಿತು. ಮೂರನೆಯ ಮಹಾವಿಪತ್ತು ಬೇಗನೆ ಬರಲಿದೆ.
15 ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು:
16 ನಂತರ ಇಪ್ಪತ್ನಾಲ್ಕು ಮಂದಿ ಹಿರಿಯರು ಮೊಣಕಾಲೂರಿ ದೇವರನ್ನು ಆರಾಧಿಸಿದರು. ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿರುವ ಹಿರಿಯರೇ ಇವರು.
17 ಆ ಹಿರಿಯರು ಹೀಗೆ ಹೇಳಿದರು:
18 ಲೋಕದ ಜನರು ಕೋಪಗೊಂಡಿದ್ದರು.
19 ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.