João 18

KAN2010

1 ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.

2 ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.

3 ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.

4 ತನಗೆ ಸಂಭವಿಸಲಿದ್ದ ಪ್ರತಿಯೊಂದೂ ಯೇಸುವಿಗೆ ತಿಳಿದಿತ್ತು. ಆತನು ಹೊರಗೆ ಹೋಗಿ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

5 ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು.

6 ಆತನು, “ನಾನೇ ಯೇಸು” ಎಂದಾಗ ಅವರು ಹಿಂದೆ ಸರಿದು ನೆಲದ ಮೇಲೆ ಬಿದ್ದರು.

7 ಯೇಸು ಅವರಿಗೆ ಮತ್ತೆ “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದನು.

8 ಆತನು, “ನಾನೇ ಯೇಸು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನು ಹುಡುಕುತ್ತಿದ್ದರೆ, ಉಳಿದ ಇವರನ್ನು ಹೋಗಬಿಡಿರಿ” ಎಂದು ಹೇಳಿದನು.

9 “ನೀನು ನನಗೆ ಕೊಟ್ಟ ಜನರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ” ಎಂದು ಯೇಸು ಮೊದಲು ಹೇಳಿದ್ದ ಮಾತು ಹೀಗೆ ನಿಜವಾಯಿತು.

10 ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.)

11 ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು! ತಂದೆಯು ನನಗೆ ಕೊಟ್ಟಿರುವ ಸಂಕಟದ ಪಾತ್ರೆಯನ್ನು ನಾನು ಸ್ವೀಕರಿಸಿಕೊಳ್ಳಬೇಕು” ಎಂದು ಹೇಳಿದನು.

12 ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.

13 ಅನ್ನನು ಕಾಯಫನ ಮಾವ. ಆ ವರ್ಷ ಕಾಯಫನು ಪ್ರಧಾನಯಾಜಕನಾಗಿದ್ದನು.

14 ಎಲ್ಲಾ ಜನರಿಗಾಗಿ ಒಬ್ಬನು ಸಾಯುವುದೇ ಮೇಲು ಎಂಬ ಸಲಹೆಯನ್ನು ಕೊಟ್ಟಿದ್ದವನು ಇವನೇ.

15 ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು.

16 ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.

17 ದ್ವಾರಪಾಲಕಿಯು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದಳು.

18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.

19 ಪ್ರಧಾನಯಾಜಕನು ಯೇಸುವಿಗೆ ಆತನ ಶಿಷ್ಯರ ಬಗ್ಗೆಯೂ ಆತನು ಉಪದೇಶಿಸಿದ ಸಂಗತಿಗಳ ಬಗ್ಗೆಯೂ ಪ್ರಶ್ನೆಗಳನ್ನು ಕೇಳಿದನು.

20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.

21 ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.

22 ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ಆ ರೀತಿ ಮಾತಾಡಕೂಡದು” ಎಂದನು.

23 ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.

24 ಆಗ ಅನ್ನನು ಯೇಸುವನ್ನು ಮತ್ತೆ ಕಟ್ಟಿಸಿ, ಪ್ರಧಾನಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

25 ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು.

26 ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಆ ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.

27 ಆದರೆ ಪೇತ್ರನು ಮತ್ತೆ, “ಇಲ್ಲ, ನಾನು ಆತನೊಂದಿಗೆ ಇರಲಿಲ್ಲ!” ಎಂದನು. ಆ ಕೂಡಲೇ ಕೋಳಿ ಕೂಗಿತು.

28 ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.

29 ಆದ್ದರಿಂದ ಪಿಲಾತನು ಆ ಯೆಹೂದ್ಯರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ನೀವು ಹೊರಿಸುತ್ತಿರುವ ಅಪರಾಧಗಳೇನು?” ಎಂದು ಕೇಳಿದನು.

30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.

31 ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು.

32 (ತಾನು ಸಾಯುವ ರೀತಿಯ ಬಗ್ಗೆ ಯೇಸು ಹೇಳಿದ್ದ ಮಾತು ಹೀಗೆ ನಿಜವಾಯಿತು.)

33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.

34 ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.

35 ಪಿಲಾತನು, “ನಾನು ಯೆಹೂದ್ಯನಲ್ಲ! ನಿನ್ನ ಸ್ವಂತ ಜನರು ಮತ್ತು ಅವರ ಮಹಾಯಾಜಕರು ನಿನ್ನನ್ನು ಕರೆದುಕೊಂಡು ಬಂದು ನನ್ನ ಮುಂದೆ ನಿಲ್ಲಿಸಿದ್ದಾರೆ. ನೀನು ಏನು ಮಾಡಿದೆ?” ಎಂದು ಕೇಳಿದನು.

36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.

37 ಪಿಲಾತನು, “ಹಾಗಾದರೆ ನೀನು ರಾಜ!” ಎಂದನು.

38 ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.

39 ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.

40 ಯೆಹೂದ್ಯರು, “ಇಲ್ಲ, ಅವನನ್ನಲ್ಲ! ಬರಬ್ಬನಿಗೆ ಬಿಡುಗಡೆಯಾಗಲಿ!” ಎಂದು ಕೂಗಿದರು. (ಬರಬ್ಬನು ಒಬ್ಬ ದರೋಡೆಕೋರ.)

Ler em outra tradução

Comparar lado a lado