Mateus 20

KAN2010

1 “ಪರಲೋಕರಾಜ್ಯವು ಒಬ್ಬ ದ್ರಾಕ್ಷಿತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.

2 ಒಂದು ದಿನಕ್ಕೆ ಒಬ್ಬ ಕೆಲಸಗಾರನಿಗೆ ಒಂದು ಬೆಳ್ಳಿನಾಣ್ಯವನ್ನು ಕೊಡುವುದಾಗಿ ಹೇಳಿ ಆ ಕೆಲಸಗಾರರನ್ನು ಅವನು ತೋಟಕ್ಕೆ ಕಳುಹಿಸಿದನು.

3 “ಸುಮಾರು ಒಂಭತ್ತು ಗಂಟೆಗೆ ಯಜಮಾನನು ಪೇಟೆಯ ಸ್ಥಳಕ್ಕೆ ಹೋದನು. ಏನೂ ಕೆಲಸವಿಲ್ಲದೆ ಸುಮ್ಮನೆ ನಿಂತಿದ್ದ ಕೆಲವರನ್ನು ಅವನು ಅಲ್ಲಿ ಕಂಡನು.

4 ಅವನು ಅವರಿಗೆ, ‘ನೀವು ಹೋಗಿ ನನ್ನ ತೋಟದಲ್ಲಿ ಕೆಲಸ ಮಾಡುವುದಾದರೆ ನಿಮ್ಮ ಕೆಲಸಕ್ಕೆ ಯೋಗ್ಯವಾದ ಕೂಲಿಯನ್ನು ಕೊಡುತ್ತೇನೆ’ ಎಂದು ಹೇಳಿದನು.

5 ಆ ಕೂಲಿಯಾಳುಗಳು ಕೆಲಸ ಮಾಡಲು ಅವನ ತೋಟಕ್ಕೆ ಹೋದರು.

6 ಸುಮಾರು ಐದು ಗಂಟೆಗೆ ಆ ಯಜಮಾನನು ಮತ್ತೊಮ್ಮೆ ಪೇಟೆಗೆ ಹೋದನು. ಅಲ್ಲಿ ನಿಂತಿದ್ದ ಕೆಲವರನ್ನು ಅವನು ಕಂಡು, ‘ನೀವು ದಿನವಿಡೀ ಕೆಲಸ ಮಾಡದೆ ಸುಮ್ಮನೆ ಏಕೆ ನಿಂತಿದ್ದೀರಿ?’ ಎಂದು ಕೇಳಿದನು.

7 “ಅದಕ್ಕೆ ಅವರು, ‘ನಮಗೆ ಯಾರೂ ಕೆಲಸ ಕೊಡಲಿಲ್ಲ’ ಎಂದು ಉತ್ತರಕೊಟ್ಟರು.

8 “ಅಂದು ಸಾಯಂಕಾಲ, ತೋಟದ ಯಜಮಾನನು ಕೆಲಸಗಾರರನ್ನು ನೋಡಿಕೊಳ್ಳುವವನಿಗೆ, ‘ಕೂಲಿಯಾಳುಗಳನ್ನು ಕರೆದು ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದನು.

9 “ಐದು ಗಂಟೆಯ ಸಮಯದಲ್ಲಿ ಗೊತ್ತುಮಾಡಲ್ಪಟ್ಟ ಕೂಲಿಯಾಳುಗಳು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಪ್ರತಿಯೊಬ್ಬ ಆಳಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

10 ನಂತರ ಮೊಟ್ಟಮೊದಲು ಗೊತ್ತುಮಾಡಲ್ಪಟ್ಟಿದ್ದವರು ತಮ್ಮ ಕೂಲಿಯನ್ನು ತೆಗೆದುಕೊಳ್ಳಲು ಬಂದರು. ಬೇರೆ ಆಳುಗಳಿಗಿಂತ ತಮಗೆ ಹೆಚ್ಚು ಸಿಕ್ಕುವುದೆಂದು ಅವರು ಆಲೋಚಿಸಿಕೊಂಡಿದ್ದರು. ಆದರೆ ಅವರಿಗೂ ಸಹ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.

11 ಅವರು ತಮ್ಮ ಬೆಳ್ಳಿನಾಣ್ಯವನ್ನು ತೆಗೆದುಕೊಂಡಾಗ ತೋಟದ ಯಜಮಾನನ ಬಗ್ಗೆ ಗೊಣಗುಟ್ಟುತ್ತಾ,

12 ‘ಕೊನೆಗೆ ಗೊತ್ತುಮಾಡಲ್ಪಟ್ಟ ಆಳುಗಳು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಇವನು ಅವರಿಗೂ ನಮ್ಮಷ್ಟೇ ಕೊಟ್ಟಿದ್ದಾನೆ. ನಾವಾದರೋ ದಿನವೆಲ್ಲಾ ಬಿಸಿಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ’ ಎಂದರು.

13 “ತೋಟದ ಯಜಮಾನನು ಆ ಆಳುಗಳಲ್ಲಿ ಒಬ್ಬನಿಗೆ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ಒಂದು ಬೆಳ್ಳಿನಾಣ್ಯಕ್ಕಾಗಿ ಕೆಲಸ ಮಾಡಲು ಒಪ್ಪಿಕೊಂಡೆಯಲ್ಲವೇ?

14 ಆದ್ದರಿಂದ ನೀನು ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು. ನಾನು ನಿನಗೆ ಎಷ್ಟು ಕೂಲಿ ಕೊಟ್ಟೆನೋ ಅಷ್ಟೇ ಕೂಲಿಯನ್ನು ಕೊನೆಗೆ ಗೊತ್ತುಮಾಡಲ್ಪಟ್ಟವನಿಗೂ ಕೊಡಲು ಇಷ್ಟಪಡುತ್ತೇನೆ.

15 ನನ್ನ ಸ್ವಂತ ಹಣವನ್ನು ನನಗೆ ಇಷ್ಟಬಂದ ಹಾಗೆ ನಾನು ಕೊಡಬಹುದಲ್ಲವೇ? ನಾನು ಅವರಿಗೆ ಒಳ್ಳೆಯದನ್ನು ಮಾಡಿದ್ದಕ್ಕಾಗಿ ನೀನು ಹೊಟ್ಟೆಕಿಚ್ಚುಪಡುವೆಯಾ?’ ಎಂದನು.

16 “ಇದೇಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು.”

17 ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು,

18 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು.

19 ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.

20 ಆಗ ಜೆಬೆದಾಯನ ಹೆಂಡತಿಯು ಯೇಸುವಿನ ಬಳಿಗೆ ಬಂದಳು. ಅವಳ ಗಂಡುಮಕ್ಕಳು ಅವಳೊಂದಿಗಿದ್ದರು. ಅವಳು ಯೇಸುವಿನ ಮುಂದೆ ಅಡ್ಡಬಿದ್ದು ತನ್ನ ಕೋರಿಕೆಯನ್ನು ಈಡೇರಿಸಬೇಕೆಂದು ಕೇಳಿಕೊಂಡಳು.

21 ಯೇಸು, “ನಿನ್ನ ಕೋರಿಕೆ ಏನು?” ಎಂದನು.

22 ಯೇಸು ಅವಳ ಮಕ್ಕಳಿಗೆ, “ನೀವು ಏನು ಕೇಳಿಕೊಳ್ಳುತ್ತಿದ್ದೀರೆಂಬುದೇ ನಿಮಗೆ ಗೊತ್ತಿಲ. ನಾನು ಅನುಭವಿಸಬೇಕಾಗಿರುವ ಸಂಕಟವನ್ನು ಅನುಭವಿಸಲು ನಿಮಗೆ ಸಾಧ್ಯವೋ?” ಎಂದು ಕೇಳಿದನು.

23 ಯೇಸು ಅವರಿಗೆ, “ನಾನು ಅನುಭವಿಸಲಿರುವ ಸಂಕಟಗಳನ್ನು ನೀವು ನಿಜವಾಗಿಯೂ ಅನುಭವಿಸುವಿರಿ. ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವವನನ್ನು ಆಯ್ಕೆಮಾಡುವವನು ನಾನಲ್ಲ. ನನ್ನ ತಂದೆಯು ಆ ಸ್ಥಳಗಳನ್ನು ಯಾರಿಗಾಗಿ ಕಾಯ್ದಿರಿಸಿದ್ದಾನೋ ಅವರಿಗೇ ಆ ಅವಕಾಶವನ್ನು ಕೊಡುತ್ತಾನೆ” ಎಂದನು.

24 ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.

25 ಯೇಸು ಶಿಷ್ಯರನ್ನೆಲ್ಲ ಒಟ್ಟಿಗೆ ಕರೆದು, “ಯೆಹೂದ್ಯರಲ್ಲದ ಅಧಿಪತಿಗಳು ಜನರ ಮೇಲೆ ತಮ್ಮ ಅಧಿಕಾರ ತೋರಿಸಲು ಇಷ್ಟಪಡುತ್ತಾರೆ ಎಂಬುದು ನಿಮಗೆ ಗೊತ್ತಿದೆ. ಮತ್ತು ಅವರ ಪ್ರಮುಖ ನಾಯಕರು ಜನರ ಮೇಲೆ ತಮ್ಮ ಅಧಿಕಾರವನ್ನೆಲ್ಲಾ ಚಲಾಯಿಸಲು ಇಷ್ಟಪಡುತ್ತಾರೆ.

26 ಆದರೆ ನೀವು ಹಾಗೆ ಮಾಡಬಾರದು. ನಿಮ್ಮಲ್ಲಿ ದೊಡ್ಡವನಾಗಲು ಇಚ್ಫಿಸುವವನು ಸೇವಕನಂತೆ ಸೇವೆ ಮಾಡಬೇಕು.

27 ನಿಮ್ಮಲ್ಲಿ ಮೊದಲನೆಯವನಾಗಲು ಇಚ್ಛಿಸುವವನು ಗುಲಾಮನಂತೆ ಸೇವೆ ಮಾಡಬೇಕು.

28 ಇದೇ ನಿಯಮ ಮನುಷ್ಯಕುಮಾರನಿಗೂ ಅನ್ವಯಿಸುತ್ತದೆ. ಮನುಷ್ಯಕುಮಾರನು ಬೇರೆಯವರಿಂದ ಸೇವೆ ಮಾಡಿಸಿಕೊಳ್ಳಲು ಬರದೆ ಬೇರೆಯವರಿಗೆ ಸೇವೆ ಮಾಡುವುದಕ್ಕಾಗಿ ಮತ್ತು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.

29 ಯೇಸು ಮತ್ತು ಆತನ ಶಿಷ್ಯರು ಜೆರಿಕೋವಿನಿಂದ ಹೊರಟುಹೋಗುತ್ತಿರುವಾಗ ಬಹಳ ಜನರು ಯೇಸುವನ್ನು ಹಿಂಬಾಲಿಸಿದರು.

30 ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.

31 ಜನರೆಲ್ಲರೂ ಕುರುಡರನ್ನು ಗದರಿಸಿ, ಸುಮ್ಮನಿರಬೇಕೆಂದು ಹೇಳಿದರು. ಆದರೆ ಆ ಕುರುಡರು, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಹೆಚ್ಚುಹೆಚ್ಚು ಕೂಗಿಕೊಂಡರು.

32 ಯೇಸು ನಿಂತು, ಆ ಕುರುಡರಿಗೆ “ನಾನು ನಿಮಗೆ ಏನು ಮಾಡಬೇಕೆಂದು ಆಶಿಸುತ್ತೀರಿ?” ಎಂದನು.

33 ಆಗ ಕುರುಡರು, “ಪ್ರಭುವೇ, ನಮಗೆ ಕಣ್ಣು ಕಾಣಿಸುವಂತೆ ಮಾಡು!” ಅಂದರು.

34 ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.

Ler em outra tradução

Comparar lado a lado