Mateus 5

KAN2010

1 ಯೇಸು ಈ ಜನಸಮೂಹವನ್ನು ನೋಡಿ, ಬೆಟ್ಟದ ಮೇಲೆ ಹೋಗಿ ಕುಳಿತುಕೊಂಡನು. ಆತನ ಶಿಷ್ಯರು ಸಹ ಆತನ ಬಳಿಗೆ ಬಂದರು.

2 ಆಗ ಯೇಸು ಜನರಿಗೆ ಈ ಉಪದೇಶ ಮಾಡಿದನು:

3 “ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು.

4 ಈಗ ದು:ಖದಿಂದಿರುವವರು ಧನ್ಯರು.

5 ದೀನರು ಧನ್ಯರು.

6 ನೀತಿಗಾಗಿ ತವಕಪಡುವವರು ಧನ್ಯರು.

7 ಕರುಣೆ ತೋರುವವರು ಧನ್ಯರು.

8 ಪರಿಶುದ್ಧ ಹೃದಯವುಳ್ಳವರು ಧನ್ಯರು.

9 ಸಮಾಧಾನಪಡಿಸುವವರು ಧನ್ಯರು.

10 ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು.

11 “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.

12 ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.

13 “ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.

14 “ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಗುಡ್ಡದ ಮೇಲೆ ಕಟ್ಟಿದ ಪಟ್ಟಣ ಮರೆಯಾಗಿರಲಾರದು.

15 ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.

16 ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.

17 “ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.

18 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.

19 “ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.

20 ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.

21 “‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.

23 “ಆದ್ದರಿಂದ ನೀವು ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಮುಂದೆ ದೇವರಿಗೆ ಅರ್ಪಿಸುವಾಗ, ನಿಮ್ಮ ಸಹೋದರನಿಗೆ ನಿಮ್ಮ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿಮ್ಮ ನೆನಪಿಗೆ ಬಂದರೆ,

24 ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.

25 “ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.

26 ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.

27 “‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.

28 ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

29 ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

30 ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.

31 “‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ಎಂದು ಹೇಳಲ್ಪಟ್ಟಿದೆ.

32 ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.

33 “‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

34 ಆದರೆ ನಾನು ಹೇಳುವುದೇನೆಂದರೆ, ಆಣೆ ಇಡಲೇಬೇಡಿ. ಪರಲೋಕದ ಮೇಲೂ ಆಣೆ ಇಡಬೇಡಿ, ಏಕೆಂದರೆ ಪರಲೋಕವು ದೇವರ ಸಿಂಹಾಸನ.

35 ಭೂಮಿಯ ಮೇಲೂ ಆಣೆ ಇಡಬೇಡಿ. ಏಕೆಂದರೆ ಭೂಮಿಯು ದೇವರ ಪಾದಪೀಠ. ಜೆರುಸಲೇಮಿನ ಮೇಲೂ ಆಣೆ ಇಡಬೇಡಿ, ಏಕೆಂದರೆ ಅದು ಆ ಮಹಾರಾಜನ ಪಟ್ಟಣ.

36 ನಿಮ್ಮ ತಲೆಯ ಮೇಲೂ ಆಣೆ ಇಡಬೇಡಿ. ನಿಮ್ಮ ತಲೆಯ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.

37 ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು.

38 “‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.

39 ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.

40 ಯಾವನಾದರೂ ನಿಮ್ಮ ಮೇಲಂಗಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯಬೇಕೆಂದಿದ್ದರೆ, ನಿಮ್ಮ ಒಳಂಗಿಯನ್ನು ಸಹ ಅವನಿಗೆ ಕೊಟ್ಟುಬಿಡಿರಿ.

41 ಯಾವ ಸೈನಿಕನಾದರೂ ತನ್ನೊಂದಿಗೆ ಒಂದು ಮೈಲಿ ದೂರ ಬರಬೇಕೆಂದು ನಿಮ್ಮನ್ನು ಒತ್ತಾಯಿಸಿದರೆ, ಅವನೊಂದಿಗೆ ಎರಡು ಮೈಲಿ ದೂರ ಹೋಗಿ.

42 ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.

43 “‘ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.

44 ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.

45 ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.

46 ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ಅದರಿಂದ ನಿಮಗೇನು ಪ್ರತಿಫಲ ದೊರೆಯುವುದು? ಸುಂಕದವರು ಸಹ ಹಾಗೆ ಮಾಡುತ್ತಾರೆ.

47 ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.

48 ಆದ್ದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರಬೇಕು.

Ler em outra tradução

Comparar lado a lado